ಬೆಂಗಳೂರು : ಮುಂದಿನ ಚುನಾವಣೆಯಲ್ಲೂ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ. 125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ, ಇದರ ಬಗ್ಗೆ ಬೇರೆ ಮಾತಿಲ್ಲ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದರು.
ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾವು ಬಿಜೆಪಿಯಲ್ಲೇ ಇರುತ್ತೇವೆ. ಇನ್ನು ಚುನಾವಣೆ ಹೇಗೆ ನಡೆಸಬೇಕು, ಯಾರಿಗೆ ಯಾವ ಉಸ್ತುವಾರಿ ಕೊಡಬೇಕು ಎಂಬುದು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ , ಡಿ. ಕೆ ಶಿವಕುಮಾರ್ ಸ್ವಾಗತ ಮಾಡಿದರೂ ನಾವು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದರು.
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್ಗೆ ನಾವೀಕನೇ ಇಲ್ಲ, ಹೀಗಾಗಿ ಬಿಜೆಪಿಗೆ ಬರುತ್ತಿದ್ದಾರೆ. ಬಿಜೆಪಿಯಿಂದ ಯಾರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಗುಜರಾತ್ ಮಾದರಿ ಚುನಾವಣೆ ಮಾಡುವುದು ವರಿಷ್ಠರಿಗೆ ಬಿಟ್ಟ ವಿಚಾರ. 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರ ಹಿಡಿಯಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲ ಬಿಜೆಪಿಗರು ಎಂಬ ಮಾತು ಕೇಳಿಬರುತ್ತಿದ್ದು, ಕಾಂಗ್ರೆಸ್ನಿಂದ ಬಿಜೆಪಿಗೆ ವಲಸೆ ಬಂದ ಕೆಲ ಶಾಸಕರಲ್ಲಿ ಹಳ್ಳಿ ಹಕ್ಕಿ ವಿಶ್ವನಾಥ್ ಕೂಡ ಒಬ್ಬರಾಗಿದ್ದಾಋಎ. ಇದೀಗ ವಿಶ್ವನಾಥ್ ಕಾಂಗ್ರೆಸ್ನತ್ತ ಮುಖಮಾಡಿದ್ದಾರೆ. ಈ ಹಿನ್ನೆಲೆ ಕೆಲ ಶಾಸಕರು ಮತ್ತೆ ಕಾಂಗ್ರೆಸ್ಗೆ ಹೋಗುತ್ತಾರೆ ಎಂಬ ಮಾತಿಗೆ ಎಂಟಿಬಿ ಉತ್ತರಿಸಿದರು.