ಚಿತ್ರದುರ್ಗ: ಮೋದಿ ಸದಾ ಕಾಲ ಪ್ರಚಾರದಲ್ಲೇ ಇರುತ್ತಾರೆ, ಕರ್ನಾಟಕದಲ್ಲಿ ಕಡಿಮೆ ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ವೇಳೆ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಪ್ರಚಾರ ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆ ಚಿತ್ರದುರ್ಗದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಿಎಂ ಅಂದ್ರೆ ಪ್ರಧಾನ ಮಂತ್ರಿ ಅಲ್ಲ, ಪ್ರಚಾರ ಮಂತ್ರಿ, ನರೇಂದ್ರ ಮೋದಿ ಪ್ರಧಾನಿ ಆಗದೆ ಪ್ರಚಾರ ಮಂತ್ರಿಗಳಾಗಿದ್ದಾರೆಂದು ವ್ಯಂಗ್ಯವಾಡಿದರು. ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಸಮಸ್ಯೆಗಳು ಉಲ್ಬಣವಾಗಿವೆ , ದೇಶದಲ್ಲಿ ಉದ್ಯಮಪತಿಗಳ ಪ್ರಗತಿಯಾಗಿದೆಯೇ ಹೊರತು ಜನಸಾಮಾನ್ಯರ ಕಲ್ಯಾಣವಾಗಿಲ್ಲ ಎಂದು ಆರೋಪಿಸಿದರು.
ಕೆಲಸ ಕಾರ್ಯ ಬಿಟ್ಟು ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆ, ಮೋದಿ ಮಂತ್ರಿ ಮಂಡಲದ ಎಲ್ಲ ಸದಸ್ಯರು ಕೆಲಸ ಬಿಟ್ಟು ಕೆಟ್ಟಪ್ರಚಾರ ಮಾಡುತ್ತಾರೆಂದರು. ದೇಶದಲ್ಲಿ ನಿರುದ್ಯೋಗ, ಬೆಲೆಏರಿಕೆ ಸಮಸ್ಯೆಯಿದೆ. ಗಡಿ ಪ್ರದೇಶಗಳಲ್ಲಿ ಸುರಕ್ಷತೆ ಇಲ್ಲ. ಪೂಂಛ್, ಕಾಶ್ಮೀರದ ಗಡಿ ಪ್ರದೇಶದಲ್ಲಿ ಸೈನಿಕರು ಹುತಾತ್ಮರಾಗಿದ್ದಾರೆ. ಛತ್ತೀಸ್ಗಡದಲ್ಲಿ ನಕ್ಸಲರ ದಾಳಿ ನಡೆದಿದೆ. ಮಣಿಪುರದಂಥ ಶಾಂತಿ ಪ್ರದೇಶದಲ್ಲೂ ಹಿಂಸಾಕೃತ್ಯ ನಡೆಯುತ್ತಿದೆ. ಆಂತರಿಕ ಸುರಕ್ಷತೆ, ದೇಶದ ಗಡಿ ಸುರಕ್ಷತೆ ಸಾಧ್ಯವಾಗುತ್ತಿಲ್ಲ. ಬಿಜೆಪಿ ಸರ್ಕಾರ ದ್ವೇಷ ಬಿತ್ತಿ, ಜನರಲ್ಲಿ ಶಾಂತಿ ಕದಡುತ್ತಿದೆ ಎಂದು ದೂರಿದರು.