ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ, ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಕುಟುಂಬ ರಾಜಕಾರಣದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಬಾಗಲಕೋಟೆಯ ಮಾಜಿ ಶಾಸಕ ಎಚ್.ವೈ.ಮೇಟಿ ಕುಟುಂಬದಲ್ಲಿ ಟಿಕೆಟ್ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.
ಮೇಟಿ ಕುಟುಂಬಕ್ಕೆ ಟಿಕೆಟ್ ಫಿಕ್ಸ್..!
ಶಾಸಕ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ಹಾಗೂ ಮಹಾದೇವಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ರುವ ಮಹಾದೇವಿ ಅವರ ಅಭಿಮಾನಿಗಳು ‘ಮಾರ್ಚ್ 20 ರಂದು ಮಹಾದೇವಿ ಮೇಟಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತ ಸಿಎಂ, ಎಲ್ಲರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ಮಾಡಿದ್ದು, ತಮ್ಮ ಕುಟುಂಬಕ್ಕೆ ನೀಡುತ್ತೇವೆ. ಆದ್ರೆ, ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಕನ್ಫರ್ಮ್ ಆದಂತಾಗಿದೆ.