ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಸಿದ್ಧತೆ ಚುರುಕುಗೊಳಿಸಿವೆ.
ಬಿಜೆಪಿಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಇಲ್ಲಿ ತಂತ್ರಗಾರಿಕೆಯನ್ನು ಹೆಣೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಈ ಬಾರಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆನ್ನುವ ಗುರಿಯನ್ನು ಬಿಜೆಪಿ ಇರಿಸಿಕೊಂಡಿದೆ. ಅದಕ್ಕೆ ತಕ್ಕಂತೆ ತಂತ್ರಗಳನ್ನು ಹೆಣೆಯುವ ಪ್ರಕ್ರಿಯೆಗೂ ಚಾಲನೆ ಸಿಕ್ಕಿದೆ.
ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿಯು ಬೆಂಗಳೂರಿನ 15 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಇದನ್ನು 22ಕ್ಕೆ ಏರಿಸಬೇಕೆಂಬ ರಣತಂತ್ರವನ್ನು ಬಿಜೆಪಿ ಸಿದ್ಧಪಡಿಸಿದೆ. ಕೆಳದ ಬಾರಿ ಗೆಲುವು ಕಂಡ ಮತ್ತು ಕಡಿಮೆ ಅಂತರದಲ್ಲಿ ಸೋಲು ಕಂಡ ಕ್ಷೇತ್ರಗಳನ್ನೇ ಮುಖ್ಯ ಗುರಿಯಾಗಿಸಲು ಬಿಜೆಪಿ ಮುಂದಾಗಿದೆ. ಅದರಂತೆ ಜಯನಗರ, ಹೆಬ್ಬಾಳ, ಶಿವಾಜಿನಗರ, ಬ್ಯಾಟರಾಯನಪುರ ಮತ್ತು ದಾಸರಹಳ್ಳಿ ಕ್ಷೇತ್ರಗತ್ತ ಬಿಜೆಪಿ ಹೆಚ್ಚು ಗಮನ ಹರಿಸುತ್ತಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯ ನಂತರ ಕಾಂಗ್ರೆಸ್ನಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಸಂಘಟನಾ ಪ್ರಕ್ರಿಯೆಗೆ ಹೊಸ ವೇಗ ಸಿಕ್ಕಿದೆ. ಪಂಚರತ್ನ ಯಾತ್ರೆಯ ಮೂಲಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸಂಚರಿಸುತ್ತಿದ್ದಾರೆ. ಕರ್ನಾಟಕದ ವಿದ್ಯಮಾನಗಳು ದಿನದಿಂದ ಇಡೀ ದೇಶದ ಗಮನ ಸೆಳೆಯುತ್ತಿದೆ.