ಉಡುಪಿ : ಮುಂಬರಲಿರುವ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಚುನಾವಣೆಯು ಪಕ್ಷಾಧಾರಿತ ಚುನಾವಣೆಯಾಗಿದ್ದು ಪಕ್ಷದ ವಿಚಾರಧಾರೆ ಇರುವವರನ್ನು ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸುವ ಜೊತೆಗೆ ನಕಲಿ ಮತದಾರರ ಸೇರ್ಪಡೆಯಾಗದಂತೆ ನಿಗಾ ವಹಿಸಬೇಕು. 3 ವರ್ಷದ ಪದವಿ ಪಡೆದು ನವೆಂಬರ್ 1ರಂದು 3 ವರ್ಷ ಪೂರೈಸುವ ಪದವೀಧರರು ಪದವೀಧರ ಕ್ಷೇತ್ರಕ್ಕೆ ಮತ್ತು ಕಳೆದ 6 ವರ್ಷಗಳಲ್ಲಿ ಕನಿಷ್ಠ 3 ವರ್ಷ ನಿರಂತರ 8ನೇ ತರಗತಿ ಮೇಲ್ಪಟ್ಟ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಕ್ಷಕರು ಶಿಕ್ಷಕರ ಕ್ಷೇತ್ರಕ್ಕೆ ಹಾಗೂ ಈ ನಿಗದಿತ ಅರ್ಹತೆ ಹೊಂದಿರುವವರು ಎರಡೂ ಕ್ಷೇತ್ರಗಳ ಮತದಾರರಾಗಿ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಚೈತ್ರಾಗೆ ಸೇರಿದ ಕಾರು, ಹಣ, ಚಿನ್ನಾಭರಣ ವಶಕ್ಕೆ ಪಡೆದ ಸಿಸಿಬಿ
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು, ಜವಾಬ್ದಾರಿ ಹೊಂದಿರುವ ತಂಡದ ಜೊತೆಗೆ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಚುನಾವಣೆಯ ಪೂರ್ಣ ಪ್ರಮಾಣದ ಗೆಲುವಿಗೆ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಈ ಹಿಂದಿನ ಚುನಾವಣೆಗಳ ವಿಶ್ಲೇಷಣೆ ಸಹಿತ ಮಾತನಾಡಿ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಬಾರಿ ಗೆಲುವು ಸಾಧಿಸಿರುವ ಇತಿಹಾಸವಿದೆ. ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತೀ ಮಂಡಲವಾರು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮುಂತಾದವರು ಉಪಸ್ಥಿತರಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.