ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಬಹಿಷ್ಕಾರ ಹಾಕಲು ಹಲಕುರ್ಕಿ ಗ್ರಾಮದ ಜನ ನಿರ್ಧರಿಸಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು ವಿಮಾನ ನಿಲ್ದಾಣಕ್ಕಾಗಿ ಫಲವತ್ತಾದ ಕೃಷಿ ಭೂಮಿಯನ್ನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದರೂ ಕೆಐಎಡಿಬಿಯಿಂದ ರೈತರಿಗೆ ನೊಟೀಸ್ ನೀಡಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ ಹಾಗೂ ರೈತರ ಪರ ದನಿ ಎತ್ತುತ್ತಿಲ್ಲ ಎಂಬ ಕಾರಣದಿಂದ ವಿಪಕ್ಷ ನಾಯಕ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ವಿರುದ್ಧ ಸ್ವಕ್ಷೇತ್ರದಲ್ಲೇ ಬಹಿಷ್ಕಾರದ ಕೂಗು ಕೇಳಿಬಂದಿದೆ. ಗ್ರಾಮದ 2 ಸಾವಿರ ಎಕರೆ ಭೂಪ್ರದೇಶವನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು 80 ದಿನಗಳಿಂದ ಪ್ರತಿಭಟನೆ ಮಾಡ್ತಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಗ್ರಾಮದ ರೈತರ ಪರವಾಗಿ ದನಿ ಎತ್ತಿಲ್ಲ.
ಸದನದಲ್ಲೂ ಇದರ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಆದ್ದರಿಂದ ಹಲಕುರ್ಕಿ ಗ್ರಾಪಂ ವ್ಯಾಪ್ತಿಯ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಇದೇ ಡಿ.12ರಂದು ಬಿಸಿಎಂ ಹಾಸ್ಟೆಲ್ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ ಹಾಕಬೇಕು ಎಂದು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಅನೇಕ ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸಿದ್ದರಾಮಯ್ಯ ತಿರುಗಿನೋಡಿಲ್ಲವೆಂದು ಹೇಳಿ ಬಾದಾಮಿಯ ಹಲಕುರ್ಕಿ ಗ್ರಾಮದ ಜನ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.