ಚಾಮರಾಜನಗರ : ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದು ತಲೆ ಮೇಲೆ ಕಲ್ಲು ಹೊತ್ತು ವಿನೂತನವಾಗಿ ಪ್ರತಿಭಟನೆ ನಡೆಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕನ್ನಡಿಗರ ತಲೆ ಮೇಲೆ ಚಪ್ಪಡಿ ಹಾಕಿವೆ ಎಂದು ಕಿಡಿ ಕಾರಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದಾರೆ. ಚಾಮರಾಜೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದ ಬಳಿ ಜಮಾವಣೆಗೊಂಡು ಕಾವೇರಿ ವಿಚಾರದಲ್ಲಿ ಶಾಸಕರು, ಸಂಸದರ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ.
ಇದನ್ನೂ ಓದಿ : ಪಾರ್ಶ್ವವಾಯುವಿನಿಂದ ಹೆಚ್ಡಿಕೆ ಗುಣಮುಖ; ಚಿಕಿತ್ಸೆ ಕೊಟ್ಟ ವೈದ್ಯರು ಹೇಳಿದ್ದೇನು?
ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸುವಂತೆ ಆಗ್ರಹಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿ ನ್ಯಾಯಾಧಿಕರಣಕ್ಕೆ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡುವಲ್ಲಿ ವಿಫಲವಾಗಿದೆ. ಸರ್ಕಾರಕ್ಕೆ ಕನ್ನಡ ನಾಡಿನ ರೈತರ ಪರ ಕಾಳಜಿ ಇಲ್ಲ, ಲೋಕಸಭಾ ಚುನಾವಣೆ ಮೈತ್ರಿಗಾಗಿ ರಾಜ್ಯ ಸರ್ಕಾರ ತಮಿಳುನಾಡಿಗೆ ಗುಲಾಮಗಿರಿ ಮಾಡುತ್ತಿದೆ ಎಂದು ಆಕ್ರೋಶದ ಕಿಚ್ಚನ್ನು ಹೊರಹಾಕಿದ್ದಾರೆ.
ತಕ್ಷಣ ಇಂತಹ ಧೋರಣೆ ನಿಲ್ಲಿಸಿ ರಾಜ್ಯದ ಜಲಾಶಯಗಳ ಬಗ್ಗೆ ನ್ಯಾಯಾಲಯಕ್ಕೆ ವಸ್ತು ಸ್ಥಿತಿ ಮನವರಿಕೆ ಮಾಡಬೇಕು, ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.