ಬೆಂಗಳೂರು: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕಾರ ಪ್ರಕರಣ ಸಂಬಂಧ ಸಮಗ್ರವಾದ ತನಿಖೆ ನಡೆಯುತ್ತಿದೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಿಸೋ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಸೂಕ್ತವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ, ನಾನೇನು ಮಾತನಾಡಲು ಹೋಗುವುದಿಲ್ಲ ಎಂದು ತಿಳಿಸಿದರು. ಪ್ರಕರಣದಲ್ಲಿ ಯಾರೂ ಕೂಡ ಮಧ್ಯಪ್ರವೇಶ ಮಾಡುತ್ತಿಲ್ಲ, ಲಂಚ ಪ್ರಕರಣ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಬಗ್ಗೆ ನಾನೇನು ಉತ್ತರ ನೀಡುವುದಿಲ್ಲ ಎಂದು ಉತ್ತರಿಸಲು ನಿರಾಕರಿಸಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ದಾಳಿ ವಿಚಾರದಲ್ಲಿ ನಾನು ಇಷ್ಟೇ ಹೇಳಬಯಸುತ್ತೇನೆ. ಲೋಕಾಯುಕ್ತವು ಸರ್ವ ಸ್ವತಂತ್ರವಾದ ಸಂಸ್ಥೆ. ಲಂಚ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಾವು ಲೋಕಾಯುಕ್ತವನ್ನು ಮತ್ತೆ ಸ್ಥಾಪನೆ ಮಾಡಿರುವುದೇ ಭ್ರಷ್ಟಾಚಾರ ನಿಗ್ರಹಿಸುವುದಕ್ಕಾಗಿ ಎಂದು ಹೇಳಿದ್ದರು. ಅಲ್ಲದೆ, ಈ ಹಿಂದೆ ಕಾಂಗ್ರೆಸ್ ನವರು ಮುಚ್ಚಿಹಾಕಿದ್ದ ಪ್ರಕರಣಗಳ ತನಿಖೆ ಮಾಡಿಸುವುದಾಗಿಯೂ ಸಿಎಂ ಬೊಮ್ಮಾಯಿ ತಿಳಿಸಿದ್ದರು.