ಬೆಂಗಳೂರು: ಸ್ವಪಕ್ಷದ ನಾಯಕ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿರುವ ಆರೋಪದ ಮೇರೆಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ.


ಬಿ.ಕೆ.ಹರಿಪ್ರಸಾದ್ ಅವರು ಇತ್ತೀಚೆಗೆ ವೇದಿಕೆಗಳಲ್ಲಿ ಮಾತನಾಡುವಾಗಲೂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ಗೆ ದೂರು ಹೋಗಿತ್ತು. ಈ ಹಿನ್ನೆಲೆ 10 ದಿನಗಳೊಳಗೆ ಉತ್ತರಿಸುವಂತೆ ಹರಿಪ್ರಸಾದ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಅಲ್ಲದೆ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಆರೋಪದ ಮೇಲೂ ಶಿಸ್ತುಕ್ರಮ ಕೈಗೊಂಡಿರುವುದಾಗಿ ಎಐಸಿಸಿ ಶಿಸ್ತು ಸಮಿತಿಯ ನೋಟಿಸ್ನಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ: ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಧನ್ಯವಾದ : ಸಿಎಂಗೆ ಟಾಂಗ್ ಕೊಟ್ಟ ಬಿ.ಕೆ ಹರಿಪ್ರಸಾದ್
ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಖಾಯಂ ಸದಸ್ಯರೂ ಆಗಿರುವ ಬಿ.ಕೆ.ಹರಿಪ್ರಸಾದ್ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರನ್ನು ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸ್ವೀಕರಿಸಿದ್ದಾರೆ. 2023 ರ ಸೆಪ್ಟೆಂಬರ್ 9 ರಂದು ಬೆಂಗಳೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ ವಿಷಯವನ್ನು ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಲಾಗಿದ್ದು, ಈ ನಡೆಯ ಬಗ್ಗೆ 10 ದಿನಗಳೊಳಗೆ ಸ್ಪಷ್ಟೀಕರಣ ನೀಡುವಂತೆ ಶೋಕಾಸ್ ನೋಟಿಸ್ನಲ್ಲಿ ತಿಳಿಸಿದೆ.
ಹರಿಪ್ರಸಾದ್ ಏನು ಹೇಳಿದ್ದರು?: ದೇವರಾಜ ಅರಸು ಅವರ ಜನ್ಮ ದಿನದಂದು ಸಿಎಂ ಸಿದ್ದರಾಮಯ್ಯ ಅರಸು ಅವರ ಹಳೆಯ ಕಾರಿನಲ್ಲಿ ಸುತ್ತಾಡಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿ ಟಾಂಗ್ ನೀಡಿದ್ದ ಹರಿಪ್ರಸಾದ್, ಅರಸು ಅವರ ಕಾರಿನಲ್ಲಿ ಕುಳಿತ ತಕ್ಷಣ ಯಾರೂ ಅವರ ಹಾಗೆ ಆಗಲ್ಲ. ಅರಸು ಅವರ ಚಿಂತನೆ ನಮ್ಮಲ್ಲಿ ಬರಬೇಕು. ಇವರ ಕೈಯಲ್ಲಿ ಅರಸು ಅವರ ಮೊಮ್ಮಗನನ್ನು ಎಂಎಲ್ಸಿ ಮಾಡೋಕೂ ಆಗಿಲ್ಲ ಎಂದಿದ್ದರು.
ನಮ್ದು ವೋಟ್ ಹಾಕೋ ಟೀಮ್, ನೋಟ್ ಕೋಡೋರು ಟೀಮ್. ಆದರೆ, ಅಧಿಕಾರ ನಡೆಸೋರು ಬೇರೆ. ಬೋರ್ಡ್ ಚೇರ್ಮನ್ ಮಾಡುವುದಕ್ಕೂ ಹಿಂದೆ ಮುಂದೆ ನೋಡ್ತಾರೆ ಎಂದು ಅಸಾಮಾಧಾನ ಹೊರ ಹಾಕಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.