ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ. ಹಾಗಾಗಿ ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಅಂದಿದ್ದರು. ಈಗ ನೋಡಿದ್ರೆ ಮೋದಿ ನೇತೃತ್ವದಲ್ಲಿ ಚುನಾವಣೆ ಅಂತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು. ನಾನು ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆಯಲ್ಲಿ ಬಹಳ ಬ್ಯುಸಿ ಆಗಿದ್ದೇವೆ. ಇವತ್ತು ನೆಲಮಂಗಲದ ಮುಖಂಡರು ಪಕ್ಷಕ್ಕೆ ಸೇರ್ಪಡೆ ಆಗ್ತಿದ್ದಾರೆ. ಬೆಮೆಲ್ ಕಾಂತರಾಜು ಅವರ ಬಹಳ ದೊಡ್ಡ ಬಳಗ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ನೆಲಮಂಗಲದಲ್ಲೂ ದೊಡ್ಡ ಸಭೆ ಇದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಬದಲಾವಣೆ ಪರ್ವ ಶುರುವಾಗಿದೆ. ಅನೇಕರು ಬಿಜೆಪಿಯಿಂದ ಸೇರುತ್ತಿದ್ದಾರೆ. ಹಳಬರು, ಹೊಸಬರು ಅನ್ನೋ ಹಾಗಿಲ್ಲ ಎಲ್ಲರೂ ಒಟ್ಟಿಗೆ ಕೆಲಸ ಮಾಡ್ತಾರೆ ರಾಜ್ಯದ ಜನರಿಗೆ ಬಿಜೆಪಿ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಈ ದೇಶದಲ್ಲಿ ರಾಷ್ಟ್ರೀಕರಣ ಕೆಲಸ ಮಾಡಿದರೆ ಪ್ರತಿಯೊಂದರಲ್ಲೂ ಬಿಜೆಪಿ ಖಾಸಗೀಕರಣ ಮಾಡುತ್ತಿದೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಜನರಿಗಾಗಿ ಏನು ಮಾಡಿದೆ. ಅವರು ಕೊಟ್ಟ 600 ಭರವಸೆಗಳಲ್ಲಿ ಶೇ 10ರಷ್ಟು ಈಡೇರಿಸಿಲ್ಲ ಎಂದು ಟೀಕಿಸಿದರು.