ಚಿಕ್ಕಬಳ್ಳಾಪುರ: ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನೀಡಿರುವುದು ಬಿಜೆಪಿ ಸರ್ಕಾರ ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಮಾಡುತ್ತಿರುವ ಎಲ್ಲ ಆರೋಪಗಳು ಕೇವಲ ಗಾಳಿಯಲ್ಲಿ ಗುಂಡು ಹಾರಿಸುವುದೇ ಆಗಿದ್ದು, ಈವರೆಗೆ ಒಂದೇ ಒಂದು ದಾಖಲೆಯನ್ನು ಕಾಂಗ್ರೆಸ್ ನೀಡಿಲ್ಲ ಎಂದರು. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಗಳು ಕೇಂದ್ರದಲ್ಲಿ ಮತ್ತು ಕಳೆದ ಮೂರುವರೆ ವರ್ಷದಿಂದ ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ ವಿಶ್ವಾಸ ವ್ಯಕ್ತಪಡಿಸಿದರು.
ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದಂತೆ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಸರ್ಕಾರ ನೀಡುತ್ತೇವೆ ಎಂದು ಹೇಳಿದರು.ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನಾವು ಏನೇ ಮಾತನಾಡಿದರೂ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತೇವೆ, ಆದರೆ ಕಾಂಗ್ರೆಸ್ ನಾಯಕರು ಕೇವಲ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.