ಮೈಸೂರು: ನಾನು ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪರ ಜೊತೆಗೆ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಹೇಳಿದರು.
ಮೈಸೂರಿನ ತಿ ನರಸೀಪುರದ ಕಬಿನಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷದಲ್ಲಿ ಹಿರಿಯನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ, ಅಲ್ಲದೇ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ ನನಗೆ ನೀಡಬೇಕು, ಒಂದು ವೇಳೆ ಬಿಜೆಪಿ ನನಗೆ ಟಿಕೆಟ್ ನೀಡದೆ ಇದ್ದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ. ಮುಂದಿನ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ನಾನು ಗೆಲುವು ಸಾಧಿಸಿದರೆ ಚಾಮರಾಜನಗರ ಜಿಲ್ಲೆಯ ಚಿತ್ರಣವನ್ನೇ ಬದಲು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ
ನನಗೆ ಎಂಟು ಬಾರಿ ಟಿಕೆಟ್ ಕೈ ತಪ್ಪಿದೆ. ಸುಮಾರು 500 ಕ್ಕೂ ಅತಿ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿ ನಾನು ಕಾರ್ಯಕರ್ತರ ಜೊತೆ ಚರ್ಚಿಸಿರುವೆ, ಗ್ಯಾರಂಟಿಗಳಿಗೆ ರಾಜ್ಯದ ಜನರು ಮರುಳಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಗ್ಯಾರಂಟಿಗಳು ಮತ್ತು ಭಾಗ್ಯಗಳು ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.