ಧಾರವಾಡ: ನಾಡಹಬ್ಬ ದಸರಾ ಉದ್ಘಾಟನೆ ಹಿನ್ನೆಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ದಸರಾ ಉದ್ಘಾಟನೆಗೂ ಮೊದಲು ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನ ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.
ಸೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್ನಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ರಾಷ್ಟ್ರಪತಿ ಮುರ್ಮು ವಿಶೇಷ ಅತಿಥಿಯಾಗಿದ್ದಾರೆ. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ 2015 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.
2017 ಸಂಸತ್ತಿನ 23ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ. ಹೊಸ ಹುರುಪಿನಲ್ಲಿ ಆರಂಭವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಹೊಂದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ, ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕೃಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ. ವಾತಾವರಣದೊಂದಿಗೆ, ಬೆಂಗಳೂರಿಗೂ ಹತ್ತಿರವಾಗಿದ್ದು, ಐಐಐಟಿ ಧಾರವಾಡ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಬೆಳೆಯುತ್ತಿದೆ.