ಅಮರಾವತಿ: ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆ ಆಂಧ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಈ ವೇಳೆ ಪವನ್ ಕಲ್ಯಾಣ್ ನಾಯ್ಡು ಪರ ನಿಂತು ಬಂಧನದ ವಿರುದ್ಧ ಪ್ರತಿಭಟಿಸಿದ್ರು. ಇದೀಗ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷವು ತೆಲುಗು ದೇಶಂ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ.
2024ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಜನಸೇನಾ ಪಕ್ಷ ಹಾಗೂ ತೆಲುಗು ದೇಶಂ ಪಕ್ಷವು ಮೈತ್ರಿ ಮಾಡಿಕೊಂಡು ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಜನಸೇನಾ ಪಕ್ಷದ (ಜೆಎಸ್ಪಿ) ಅಧ್ಯಕ್ಷ ಕೆ. ಪವನ್ ಕಲ್ಯಾಣ್ ಘೋಷಿಸಿದ್ದಾರೆ.
ಇದನ್ನೂ ಓದಿ: Hindi Diwas; ಹಿಂದಿ ಎಂದಿಗೂ ಭಾರತೀಯ ಭಾಷೆಗಳೊಂದಿಗೆ ಸ್ಪರ್ಧಿಸುವುದಿಲ್ಲ; ಅಮಿತ್ ಶಾ
ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಪವನ್ ಕಲ್ಯಾಣ್ ಬಳಿಕ ಈ ಘೋಷಣೆ ಮಾಡಿದ್ದಾರೆ.
ನಾನು ಸಂಪೂರ್ಣ ಅಧ್ಯಯನದ ಆಧಾರದ ಮೇಲೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳನ್ನು ಎಂದಿಗೂ ವಾಪಸ್ ಪಡೆದುಕೊಂಡಿಲ್ಲ. 2024ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಸ್ಪರ್ಧಿಸಲು ನಾನು ಮೈತ್ರಿ ಮಾಡಿಕೊಳ್ಳಲು ಮತ್ತು ಒಟ್ಟಿಗೆ ಹೋಗಲು ನಿರ್ಧರಿಸಿದ್ದೇನೆ. ಈಗಾಗಲೇ ಜೆಎಸ್ಪಿ, ಟಿಡಿಪಿ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಪ್ರಸ್ತಾಪಿಸಿದ್ದೇನೆ. ಇದಕ್ಕೂ ಮುನ್ನ ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಮಂಡಿಸಲಾಗಿತ್ತು. ಈ ಪ್ರಸ್ತಾಪವನ್ನು ಬಿಜೆಪಿ ಸಹ ಒಪ್ಪುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: Narendra Modi : ಇಂಡಿಯಾ ಒಕ್ಕೂಟವನ್ನು ‘ಘಮಾಂಡಿಯಾ’ ಎಂದು ಪಿಎಂ ಮೋದಿ ವಾಗ್ದಾಳಿ
‘ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವು ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಸಂದೇಶ ರವಾನಿಸುತ್ತದೆ. ವೈಎಸ್ಆರ್ಸಿಪಿಯು ಟಿಡಿಪಿಯೊಂದಿಗಿನ ಮೈತ್ರಿಗೆ ನಾನು ನಿರ್ಧಾರ ತೆಗೆದುಕೊಳ್ಳಬೇಕಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ಈ ವೇಳೆ ಅಭಿಪ್ರಾಯಪಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.