ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ ಜೆಡಿಎಸ್ ಪಕ್ಷ ಬಲವರ್ಧನೆಗೆ ಮುಂದಾಗಿದೆ. ಈ ಹಿನ್ನೆಲೆ ಪಕ್ಷ ಮರುಸಂಘಟನೆಗೆ ಸಂಕಲ್ಪ ಮಾಡಿದ್ದು, ಮುಂದಿನ ಭಾನುವಾರದಂದು ಬೃಹತ್ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದೆ. ನಗರದ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದ್ದು, ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ (ಎಕ್ಸ್) ಮಾಡಿರುವ ಅವರು, ‘ದೃಢ ಸಂಕಲ್ಪ ಮಾಡೋಣ, ದೃಢ ಹೆಜ್ಜೆ ಇಡೋಣ, ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ’ ಎಂದಿದ್ದಾರೆ.
ಇದನ್ನೂ ಓದಿ: ‘ಬಿಜೆಪಿ ನಾಯಕರು ಬರೀ ಷೋ ಅಪ್ ರಾಜಕಾರಣಕ್ಕೆ ಕೆಆರ್ಎಸ್ಗೆ ಬರ್ತಿದ್ದಾರೆ’
‘ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿ’ ಎಂದಿದ್ದಾರೆ.
ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಕಮಲ ಪಡೆ; ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ
‘ಸೋತಿದ್ದೇವೆ, ನಿಜ. ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ, ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು. ಈ ಹಿನ್ನೆಲೆ ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ದೇವೇಗೌಡರ ಸಾನ್ನಿಧ್ಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಸೆ.10ರ ಭಾನುವಾರ ಬೆಳಗ್ಗೆ 10.30ಗಂಟೆಗೆ ಮಹತ್ವದ ಸಭೆ ಕರೆದಿದ್ದೇವೆ. ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ತಪ್ಪದೇ ಸಭೆಗೆ ಬನ್ನಿ, ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ’ ಎಂದು ಕರೆ ನೀಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.