ತುರುವೇಕೆರೆ : ಬಿಜೆಪಿ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಒಂದು ಗೂಡಿಸುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಬೆಳಗುತ್ತಿದ್ದರೆ, ಬಿಜೆಪಿ ಮುಳುಗುತ್ತಿದೆ ಎಂದರು. ಬಿಜೆಪಿ ಕತ್ತರಿಯ ರೀತಿ ಕೆಲಸ ಮಾಡಿದರೆ, ಕಾಂಗ್ರೆಸ್ ಸೂಜಿ ದಾರದ ರೀತಿ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಪರ್ಸೆಂಟೇಜ್ನ್ನು ಕೊಡಲಾಗದೇ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಬಿಜೆಪಿಯ ದುರಾಡಳಿತದಿಂದ ರೋಸಿ ಹೋಗಿದ್ದಾರೆ. ಕೇಂದ್ರದ ಮೋದಿಯವರ ಸರ್ಕಾರ ಅಚ್ಚೇ ದಿನ್ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಅಚ್ಚೇ ದಿನ್ ಬರಲಿಲ್ಲ. ಬರೀ ನೋವಿನ ದಿನಗಳೇ ತುಂಬಿ ತುಳುಕುತ್ತಿವೆ.
ಕಾಂಗ್ರೆಸ್ ಮಾಡಿಸಿರುವ ಸರ್ವೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಬಿಜೆಪಿ 60 ಸ್ಥಾನ ಗೆಲ್ಲಲಿದೆ ಎಂದು ವರದಿ ಹೇಳಿದೆ. ಹಾಗಾಗಿ ರಾಜ್ಯದ ಜನರು ಕಾಂಗ್ರೆಸ್ ಅಧಿಕಾರಕ್ಕೆ ತರ್ತಾರೆ ದೃಢ ವಿಶ್ವಾಸ ತಮಗಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರೇ ಟೈಮ್ ವೇಸ್ಟ್ ಮಾಡಿಕೊಳ್ಳಬೇಡಿ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ಸೂರ್ಯ ಇರುವುದಷ್ಠೇ ಸತ್ಯ ಎಂದು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ನಮಗೆ ಶಕ್ತಿ ಕೊಡಿ. ನಾವು ನಿಮಗೆ ಶಕ್ತಿ ತುಂಬುವೆವು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳು ಜನರಿಗೆ ಸಾಕು ಸಾಕಾಗಿವೆ ಎಂದರು.