ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನವೆಂಬರ್ ಕ್ರಾಂತಿಗೆ ಪುಷ್ಠಿ ನೀಡುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆಯೊಂದನ್ನ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ. ಕರ್ನಾಟಕದಲ್ಲಿ ನಾಲ್ಕು ಜನ ಹೇಳಿದ ಮಾತ್ರಕ್ಕೆ ನಿರ್ಧಾರ ಆಗುವುದಿಲ್ಲ. ಡಿಕೆ ಶಿವಕುಮಾರ್ ಬಗ್ಗೆ ಹೇಳೊದಕ್ಕೆ ನನಗೆ ಸಾಮರ್ಥ್ಯ ಇಲ್ಲ. ಅವರು ನಮ್ಮ ಸಮರ್ಥ ನಾಯಕರು ಮತ್ತು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಸಾಮರ್ಥ್ಯಕ್ಕೆ ಯಾರೂ ಹೋಲಿಕೆ ಇಲ್ಲ ಎಂದು ಪರಮೇಶ್ವರ್ ಶ್ಲಾಘಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ನವರು ಸಂಪೂರ್ಣವಾಗಿ ವಿಶ್ಲೇಷಣೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರಸ್ತುತ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಅದು ಮುಗಿದ ನಂತರ ಸೂಕ್ತ ನಿರ್ಧಾರ ಪ್ರಕಟವಾಗಬಹುದು ಎಂದು ಅವರು ಹೇಳಿದ್ದಾರೆ. ನವೆಂಬರ್ 11ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿ ದೆಹಲಿಗೆ ತೆರಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನವೆಂಬರ್ 15ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.