ಬಾರಾಮುಲ್ಲಾ/ಕಾಶ್ಮೀರ: ಕರ್ನಾಟಕದಲ್ಲಿ ಮುಂಬರುವ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಹಾಲ್ನೊಳಗೆ ಹಿಜಾಬ್ ಧರಿಸುವುದನ್ನು ನಿಷೇಧಿಸುವ ರಾಜ್ಯದ ಪರೀಕ್ಷಾ ಪ್ರಾಧಿಕಾರದ ನಿರ್ಧಾರಕ್ಕೆ ಸಂಬಂಧ ಮಾಜಿ ಸಿಎಂ ಒಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ದಿಷ್ಟವಾಗಿ ಮುಸ್ಲಿಮರನ್ನು ಗುರಿಯಾಗಿಸಿ ಆದೇಶವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂಬುದು ನಿರಾಸೆಯ ಸಂಗತಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ; ಮರು ಸ್ಪರ್ಧಿಸಿರುವ ಶಾಸಕರ ಆಸ್ತಿಯಲ್ಲಿ ಶೇ.50 ರಷ್ಟು ಹೆಚ್ಚಳ
ಬಾರಾಮುಲ್ಲಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಇದು ನಿರಾಶೆಯ ವಿಷಯವಾಗಿದೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಆದೇಶಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇದು ಸಂಭವಿಸಿದಾಗ ಬಿಜೆಪಿ ಸರ್ಕಾರವಾಗಿರುವುದರಿಂದ ನಮಗೆ ಆಶ್ಚರ್ಯವಾಗಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಆದೇಶಗಳು ಬಿಡುಗಡೆಯಾಗುತ್ತಿರುವುದು ನಿರಾಶೆ ತಂದಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಬಿಡುಗಡೆ ಮಾಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಬೀದಿ ನಾಯಿ ಕಡಿದರೆ ಪ್ರತೀ ಹಲ್ಲಿನ ಗುರುತಿಗೆ ₹10,000: ಹೈಕೋರ್ಟ್ ತೀರ್ಪು
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ ರಾಜ್ಯದ ವಿವಿಧ ಮಂಡಳಿಗಳು ಮತ್ತು ನಿಗಮಗಳ ಮುಂಬರುವ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಪರೀಕ್ಷಾ ಹಾಲ್ ಒಳಗೆ ಹಿಜಾಬ್ ನಿಷೇಧಿಸಿದೆ. ತಾಳಿ, ಕಾಲುಂಗರಕ್ಕೆ ಅವಕಾಶ ನೀಡಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.