ಬೆಂಗಳೂರು : ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪು ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದೃಷ್ಟಿಯಿಂದ ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ ಎಂದರು.ಇಂದು ಸಂಜೆ ಆರು ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ರಸ್ತೆ ನಾಮಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿಗಳು ರಸ್ತೆ ನಾಮಕರಣ ಉದ್ಘಾಟನೆಯನ್ನು ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ, ಸಚಿವರು, ಇಡೀ ಚಿತ್ರರಂಗದ ತಾರೆಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.
‘ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ ಆದ್ರೆ ನಮ್ಮೆಲ್ಲರೊಳಗೆ ಆಳವಾಗಿ ನೆಲೆಸಿದ್ದಾರೆ. ಪುನೀತ್ ಹೃದಯವಂತ ಮನುಷ್ಯ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ಬಹಳ ವಿಶಾಲವಾದದ್ದು. ಅವರ 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡುತ್ತಿದ್ದೇವೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.