ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಅಗತ್ಯ ಭದ್ರತೆ ಒದಗಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಭಾರತ್ ಜೋಡೋ ಯಾತ್ರೆಗೆ ಭಾರೀ ಜನರು ಸೇರುವ ನಿರೀಕ್ಷೆ ಇದೆ. ಶ್ರೀನಗರದಲ್ಲಿ ಜನವರಿ 30ರಂದು ನಡೆಯುವ ಕಾರ್ಯಕ್ರಮಕ್ಕೂ ಭಾರೀ ಜನಸ್ತೋಮ ಇರಲಿದೆ. ಹಿರಿಯ ಕಾಂಗ್ರೆಸ್ಸಿಗರು ಮಾತ್ರವಲ್ಲ ಇತರ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ….ಜನವರಿ 30ರ ಕಾರ್ಯಕ್ರಮ ಮುಗಿಯುವವರೆಗೂ ಅಗತ್ಯ ಭದ್ರತೆ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ದೇಶಾದ್ಯಂತ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿದೆ. 2022 ಸೆಪ್ಟೆಂಬರ್ನಲ್ಲಿ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಸಮಾರೋಪ ನಡೆಯಲಿದೆ.