ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಯ ಹಿಂದೆ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಕೈವಾಡ ಇದೆ ಎಂಬ ಆರೋಪದ ಬೆನ್ನಲ್ಲೇ ಮತ್ತೆ ಪೊಲೀಸ್ ಇಲಾಖೆಯಲ್ಲಿ ಅನೇಕ ಅಧಿಕಾರಿಗಳ ವರ್ಗಾವಣೆಯಾಗಿದೆ.
ಈ ಬಾರಿ ಬರೋಬ್ಬರಿ 71 ಪೊಲೀಸ್ ಇನ್ಸ್ಪೆಕ್ಟರ್ಗಳು ಹಾಗೂ 40 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದ್ದು, ವಿವಿಧ ಪೊಲೀಸ್ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳ ವರ್ಗಾವಣೆ ಬಗ್ಗೆ ಮಾತಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಈ ವರ್ಗಾವಣೆ ಪ್ರಕ್ರಿಯೆ ಆಗಿರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಶೇ.73ರಷ್ಟು, ಛತ್ತೀಸಗಢದಲ್ಲಿ ಶೇ.68.15ರಷ್ಟು ಮತದಾನ!
ವರ್ಗಾವಣೆ ಆಗಿರೋ ವಿವೇಕಾನಂದ ಯಾರು?
ಇತ್ತೀಚೆಗಷ್ಟೆ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವೀಡಿಯೋ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಯತೀಂದ್ರ ಮಾತಾಡಿರೋದು ಅಧಿಕಾರಿಗಳ ವರ್ಗಾವಣೆ ಬಗ್ಗೆ ಎಂದು ವಿಪಕ್ಷಗಳು ಆರೋಪ ಮಾಡಿದ್ದವು. ಅಧಿಕಾರಿಗಳ ವರ್ಗಾವಣೆ ಹಿಂದೆ ಯತೀಂದ್ರ ಕೈವಾಡ ಇದೆ ಅಂತ ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಈ ವಿಡಿಯೋ ವೈರಲ್ ಬೆನ್ನಲ್ಲೇ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.
ಆ ವಿಡಿಯೋ ಸಂಭಾಷಣೆಯಲ್ಲಿ ಡಾ.ಯತೀಂದ್ರ ಅವರು ವಿವೇಕಾನಂದ ಎಂಬ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಈಗ ಅದೇ ವಿವೇಕಾನಂದ ಅನ್ನೋ ಹೆಸರಿನ ಇನ್ಸ್ಪೆಕ್ಟರ್ ವರ್ಗಾವಣೆ ಆಗಿದ್ದು, ರಾಜ್ಯ ಗುಪ್ತಚರ ಇಲಾಖೆಯ ಆದೇಶದಲ್ಲಿ ಇದ್ದವರು ಮೈಸೂರು ನಗರದ ವಿವಿಪುರಂ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ. ಹೀಗಾಗಿ ಮೈಸೂರಿಗೆ ವರ್ಗಾವಣೆಗೊಂಡಿರುವ ವಿವೇಕಾನಂದ ಮತ್ತು ಡಾ ಯತೀಂದ್ರ ಅವರು ವಿಡಿಯೋದಲ್ಲಿ ಮಾತನಾಡಿರೋ ವಿವೇಕಾನಂದ ಇವರೇನಾ? ಪ್ರಶ್ನೆ ಸಹಜವಾಗಿಯೇ ಸೃಷ್ಠಿಯಾಗಿದೆ.
ವಿಡಿಯೋದಲ್ಲಿ ಏನಿದೆ?
ಡಾ.ಯತೀಂದ್ರ ಅವರು ಸಾರ್ವಜನಿಕರ ಅಹವಾಲು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿ, “ಅಪ್ಪ ಹೇಳಿ” ಎಂದು ಮಾತು ಆರಂಭಿಸುತ್ತಾ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವ್ಗೆ ಫೋನ್ ನೀಡುವಂತೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಎಂದಿದ್ದಾರೆ, ಮಾತು ಮುಂದುವರೆಸಿ, ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳಿದ್ದಾರೆ.
ಇದನ್ನೂ ಓದಿ: ₹600 ಕೋಟಿ ಭ್ರಷ್ಟಾಚಾರ ಆರೋಪ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಹೀಗಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಮಹದೇವ್ ಜೊತೆ 4-5 ಲಿಸ್ಟ್ ಅಂತ ಹೇಳಿದ್ದು ಇದೇ ವರ್ಗಾವಣೆಯ ಬಗ್ಗೆನಾ? ಎಂಬ ಪ್ರಶ್ನೆ ಮೂಡಿದ್ದು, ವಿವೇಕಾನಂದ ಅನ್ನೋ ಇನ್ಸ್ಪೆಕ್ಟರ್ ಹೆಸರು ಕೂಡ ಪಟ್ಟಿಯಲ್ಲಿ ಇರೋದು ಚರ್ಚೆ ಹುಟ್ಟು ಹಾಕಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.