ಬೆಂಗಳೂರು: ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಯುವ ಸಮುದಾಯ ಕೋಮುಗಲಭೆಗೆ ಬಲಿಯಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಾಧ್ಯಮ ಪ್ರಕಟಣೆ ಹೊರಡಿಸಿ, ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವುದು ರಾಷ್ಟ್ರೀಯ ಯುವಜನೋತ್ಸವ ಅಲ್ಲ, ಯುವ ವಿನಾಶೋತ್ಸವ ಎಂದು ವಾಗ್ದಾಳಿ ಮಾಡಿದ್ದಾರೆ. ನಿರುದ್ಯೋಗ, ಸರ್ಕಾರಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೀತಿದೆ. ಇದನ್ನು ಅಣಕಿಸುವಂತೆ ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ಬರುತ್ತಿದ್ದಾರೆ. ಸಣ್ಣ ಕೈಗಾರಿಕೆಗಳು ಮುಚ್ಚಿದ್ದರಿಂದ 83,190 ಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ಆಕ್ರೋಶಿಸಿದ್ದಾರೆ.
ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ. ಶಿಕ್ಷಣ ಕ್ಷೇತ್ರದ ಅನುದಾನ ಶೇಕಡಾ 1.97ಕ್ಕಿಂತ ಮೇಲೆ ಏರಿಲ್ಲ. ಸಿಎಜಿ ವರದಿ ಪ್ರಕಾರ 1.62 ಲಕ್ಷ ವಿದ್ಯಾರ್ಥಿಗಳು ಶಾಲೆ ತ್ಯಜಿಸಿದ್ದಾರೆ. 2020-21, 2021-22ರ ಅವಧಿಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. 1,965 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದರು. ಡಬಲ್ ಇಂಜಿನ್ ಸರ್ಕಾರ ಯುವಜನರಿಗೆ ದ್ರೋಹ ಮಾಡಿದೆ.
ಕನ್ನಡಿಗ ಯುವಕರಿಗೆ ಮಾಡಿರುವ ದ್ರೋಹ ಇತಿಹಾಸ ಮರೆಯದು. ಪ್ರಾದೇಶಿಕ ಭಾಷೆಯಲ್ಲಿ ಕೇಂದ್ರ ನೇಮಕಾತಿ ಪರೀಕ್ಷೆಗೆ ನಕಾರ ಯುವಜನರನ್ನು ತಾವು ಹುಟ್ಟಿದ ನಾಡಿನಲ್ಲೇ ಅನಾಥರನ್ನಾಗಿಸಿದೆ ಎಂದರು.