ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವಮಾನಿಸುವ ಉದ್ದೇಶ ನನ್ನದಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಸರಣಿ ಟ್ವೀಟ್ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಯಿ ತನ್ನ ನಿಷ್ಠೆಗೆ ಹೆಸರುವಾಸಿಯಾಗಿದ್ದರೆ, ನಾಯಿಮರಿ ಹೇಡಿತನಕ್ಕೆ ಹೆಸರುವಾಸಿಯಾಗಿದೆ. ಮೋದಿಯಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಅದನ್ನು ಪ್ರಶ್ನಿಸಿದ ಬೊಮ್ಮಾಯಿ ಅವರನ್ನು ಹುಲಿ ಅಥವಾ ಸಿಂಹ ಎಂದು ಕರೆಯಬೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟಿವಿ ಚಾನೆಲ್ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ, ಟಗರು ಗುಮ್ಮುತ್ತೆ ಅಂತ ಹೇಳುತ್ತಾರೆ. ಆದರೆ ನಾನು ಯಾರಿಗೆ ಗುಮ್ಮಿದ್ದೇನೆ?, ಅವರು ನನಗೆ ಅವಮಾನ ಮಾಡಿದ್ದಾರೆ ಎಂದು ನಾನೂ ಕೋಪಮಾಡಿಕೊಳ್ಳಬಹುದಲ್ಲಾ? ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ರಾಜ್ಯದ ಸಿಎಂ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವೆ? ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.