Sunday, March 26, 2023
spot_img
- Advertisement -spot_img

ರಾಜ್ಯ ಸರ್ಕಾರದ ವಿರುದ್ಧ ಶೇ.40 ಆರೋಪ : ಕೆಂಪಣ್ಣ ಸೇರಿ ನಾಲ್ವರ ಬಂಧನ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಶೇ.40 ರಷ್ಟು ಭ್ರಷ್ಟಾಚಾರ ಆರೋಪ ಮಾಡಿದ್ದಲ್ಲದೆ, ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧವೂ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿ ನಾಲ್ವರನ್ನು ಕೇಂದ್ರ ವಿಭಾಗದ ವೈಯಾಲಿಕಾವಲ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಡಿ. ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಕೃಷ್ಣಾರೆಡ್ಡಿ, ನಟರಾಜ್, ಗುರುಸಿದ್ದಪ್ಪ ಎಂಬವರನ್ನು ಬಂಧಿಸಲಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಉಪಾಧ್ಯಕ್ಷ ಕೃಷ್ಣಾರೆಡ್ಡಿ, ಖಜಾಂಚಿ ನಟರಾಜ್ ಸೇರಿ ಇತರೆ ಆರೋಪಿಗಳು ಸಚಿವ ಮುನಿರತ್ನ ವಿರುದ್ಧ ಹೇಳಿಕೆ ನೀಡಿದ್ದರು. ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು.
ಈ ಸಂಬಂಧ ಸಚಿವ ಮುನಿರತ್ನ ಕೋರ್ಟ್‌ನಲ್ಲಿ ಕ್ರಿಮಿನಲ್ ಮತ್ತು 50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ನೋಟಿಸ್ ಕೊಟ್ಟು ಡಿ.22ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಡಿ.22ರ ವಿಚಾರಣೆಗೆ ಆರೋಪಿಗಳು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನಗರದ 8ನೇ ಎಸಿಎಂಎಂ ಕೋರ್ಟ್ ಕೆಂಪಣ್ಣ ಸೇರಿ 19 ಮಂದಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಈ ಬೆನ್ನಲ್ಲೇ ಕೆಂಪಣ್ಣ ಹಾಗೂ ಇತರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಂಪಣ್ಣ ಅವರ ಆರೋಪದ ಬೆನ್ನಲ್ಲೇ ತೋಟಗಾರಿಕಾ ಮತ್ತು ಯೋಜನಾ ಸಚಿವ ಮುನಿರತ್ನ ಅವರು 50 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಸಚಿವ ಮುನಿರತ್ನ ಅವರು ನನ್ನ ವಿರುದ್ಧ 50 ಕೋಟಿ ರು. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವುದು ತುಂಬಾ ಸಂತಸದ ಸಂಗತಿ. ಅವರನ್ನು ಕೈಮುಗಿದು ಪ್ರಾರ್ಥಿಸುತ್ತೇನೆ.

ಮೊದಲು ಮೊಕದ್ದಮೆ ದಾಖಲಿಸಲಿ. ನ್ಯಾಯಾಲಯಕ್ಕೆ ಎಲ್ಲಾ ರೀತಿಯ ದಾಖಲೆಗಳನ್ನೂ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿರುಗೇಟು ನೀಡಿದ್ದರು.

Related Articles

- Advertisement -

Latest Articles