ಬೆಂಗಳೂರು: ಫೆಬ್ರವರಿ 10ರಿಂದ ನಡೆಯಲಿರುವ ಜಂಟಿ ಅಧಿವೇಶನ ಹಾಗೂ ಫೆಬ್ರವರಿ 17 ರಿಂದ ನಡೆಯಲಿರುವ ಆಯವ್ಯಯ ಅಧಿವೇಶನದಲ್ಲಿ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದನವು ಪ್ರಜಾಪ್ರಭುತ್ವದ ದೇಗುಲ, ಹಾಗಾಗಿ, ತಮ್ಮ ಸಲಹೆ ಗಂಭೀರವಾಗಿ ಪರಿಗಣಿಸಬೇಕು, ಸಕ್ರಿಯವಾಗಿ ಪಾಲ್ಗೊಂಡು ಸದನದ ಘನತೆ ಹೆಚ್ಚಿಸಬೇಕು ಎಂದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನದಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಜ್ಯಪಾಲರ ಭಾಷಣದ ನಂತರ ಚಳಿಗಾಲದ ಅಧಿವೇಶನದ ನಂತರ ಹಾಗೂ ಜಂಟಿ ಅಧಿವೇಶನದ ನಡುವೆ ಸ್ವರ್ಗಸ್ಥರಾದ ಗಣ್ಯರಿಗೆ ಸಂತಾಪ ಸಲ್ಲಿಸಲಾಗುತ್ತದೆ. ಫೆಬ್ರವರಿ 13 ರಿಂದ ಸತತವಾಗಿ ನಾಲ್ಕು ದಿನಗಳು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮತ್ತು ವಂದನಾ ನಿರ್ಣಯದ ಜೊತೆಗೆ ಎಂದಿನಂತೆ ಸದನದ ಕಾರ್ಯಕಲಾಪಗಳು ನಡೆಯುತ್ತವೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಆಯವ್ಯಯ ಮಂಡಿಸುವುದರೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯ ಅಧಿವೇಶನ ಪ್ರಾರಂಭವಾಗಲಿದೆ. ಆಯವ್ಯಯಕ್ಕೆ ಸಂಬಂಧಿಸಿದಂತೆ ಫೆಬ್ರವರಿ 20ರಿಂದ 24ರ ವರೆಗೆ ಚರ್ಚೆ ನಡೆಯಲಿದೆ ಎಂದರು.