ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಷ್ಟ್ರೀಯ ಪಕ್ಷ ಬಿಜೆಪಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಹೋಗಿರುವುದರ ಹಿಂದೆ ದೊಡ್ಡದೊಂದು ಪ್ಲಾನ್ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿಯಿಂದ ರಹಸ್ಯ ಸರ್ವೆ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿರುವ ಹಿನ್ನೆಲೆ, ಲೋಕಸಭೆ ಚುನಾವಣೆ ಗೆಲ್ಲಲು ಪಕ್ಷದ ಹೈಕಮಾಂಡ್ ರಣತಂತ್ರ ಹೂಡಿದ್ದು, ಇದರ ಭಾಗವಾಗಿ ರಹಸ್ಯ ಸರ್ವೆ ನಡೆಸಿದೆ ಎಂದು ಹೇಳಲಾಗ್ತಿದೆ. ಒಂದು ಬಾರಿ ಸಂಘ ಪರಿವಾರದಿಂದ ಮತ್ತು ಇನ್ನೆರಡು ಬಾರಿ ಖಾಸಗಿ ಏಜೆನ್ಸಿಗಳಿಂದ ಸರ್ವೆ ಮಾಡಿಸಲಾಗಿದೆಯಂತೆ.
ಒಟ್ಟು ಮೂರು ಬಾರಿ ಸರ್ವೆ ಮಾಡಿದಾಗಲೂ, ಬಿಜೆಪಿ ಕೇವಲ 8ರಿಂದ 10 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ವಿಧಾನಸಭಾ ಚುನಾವಣೆಗೆ ನೀಡಿರುವ ಗ್ಯಾರಂಟಿ ಯೋಜನೆಗಳು ಇನ್ನೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮಾತ್ರ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಹಿರಂಗವಾಗಿದೆಯಂತೆ. ಹಾಗಾಗಿ, ಬಿಜೆಪಿ ಜೆಡಿಎಸ್ ಹಿಂದೆ ಹೋಗಿದೆ ಎನ್ನಲಾಗ್ತಿದೆ.
ಇದನ್ನೂ ಓದಿ : ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಸದೆ ಸುಮಲತಾಗೆ ಶಾಕ್
ನಿನ್ನೆ (ಶುಕ್ರವಾರ) ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ. ಜೆಡಿಎಸ್ ಗೆ ನಾಲ್ಕು ಸೀಟ್ ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಹೇಳಿದಂತೆ ಹಾಸನ, ಮಂಡ್ಯ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎನ್ನಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.